ಉಡುಪಿ: ಜಿಲ್ಲೆಯಲ್ಲಿ ಬಿರುಸಿನ ಮತದಾನ; ಮತ ಚಲಾಯಿಸಿದ ಅಭ್ಯರ್ಥಿಗಳು

ಉಡುಪಿ, ಮೇ.10: ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು.

ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿರುವ ಮತಗಟ್ಟೆಗೆ ಪತ್ನಿ ಮತ್ತು ಮಗನೊಂದಿಗೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಅದೇ ರೀತಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಇದೇ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ ವೇಳೆ ಸೊರಕೆ ಮತ್ತು ಯಶ್ಪಾಲ್ ಸುವರ್ಣ ಮುಖಾಮುಖಿಯಾದರು. ಬಳಿಕ ಇವರು ಪರಸ್ಪರ ಹಸ್ತಲಾಘ ಮಾಡಿಕೊಂಡರು.

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ತನ್ನ ಪತ್ನಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಲ್ಲಿ ಮತ ಚಾಲಾಯಿಸಿದರು.

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಸಾರಥಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಪತ್ನಿ‌ ಹಾಗೂ ಕುಟುಂಬಿಕರೊಂದಿಗೆ ಆಗಮಿಸಿ ಕನ್ಯಾನ ಶಾಲೆಯ ಮತಗಟ್ಟೆಯಲ್ಲಿ ಮೊದಲ ಮತದಾನ‌ ಮಾಡಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ತಮ್ಮ ಬೆಂಬಲಿಗರೊಂದಿಗೆ ತೆರಳಿ ಮತ ಚಲಾಯಿಸಿದರು.

ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರು ತಮ್ಮ ಮತದಾನದ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಿದರು.

Scroll to Top