ಭ್ರೂಣ ಲಿಂಗ ಪತ್ತೆಹಚ್ಚುವ ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ : ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಅಪರಾಧ. ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆಹಚ್ಚುವ ಕಾರ್ಯ ಮಾಡುವ ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಆರೋಪ ಸಾಬೀತಾದ್ರೆ ಅನುಮತಿಯನ್ನು ರದ್ದುಗೊಳಿಸುತ್ತೇವೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಖಡಕ್ ಎಚ್ಚರಿಕೆ ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಿ.ಸಿ & ಪಿ.ಎನ್.ಡಿ.ಟಿ ನೋಂದಾಯಿತ ಸಂಸ್ಥೆಗಳ ಮಾಲೀಕರು ಹಾಗೂ ವೈದ್ಯರಿಗೆ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ಕ್ಯಾನಿಂಗ್ ಸೆಂಟರ್‌ಗಳು ಪರವಾನಿಗೆ ಹೊಂದಿ, ಅನುಮತಿ ಪಡೆದಿರಬೇಕು. ನಿಯಮಾನುಸಾರ ದಾಖಲಾತಿಗಳನ್ನು ಪ್ರತಿದಿನ ನಿರ್ವಹಣೆ ಮಾಡಬೇಕು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಹೆಣ್ಣು ಅಥವಾ ಗಂಡು ಎಂಬುದನ್ನು ತಿಳಿಸಬಾರದು. ಒಂದೊಮ್ಮೆ ಇದನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು. ಹಣ ಸಂಪಾದನೆ ಮಾಡುವ ಉದ್ದೇಶದಿಂದ ಈ ರೀತಿಯ ಕೃತ್ಯಗಳು ನಡೆಯುತ್ತಿದ್ದು, ಪರೀಕ್ಷಿಸಲು ಬರುವ ಸ್ಕ್ಯಾನಿಂಗ್ ಸೆಂಟರ್‌ಗಳ ಸಿಬ್ಬಂದಿ, ಪೋಷಕರಿಗೆ ಮತ್ತು ವೈದ್ಯರಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಹೆಣ್ಣು ಭ್ರೂಣಹತ್ಯೆಯಿಂದಾಗಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇದರಿಂದ ಸಾಮಾಜಿಕವಾಗಿ ಅಸಮತೋಲನ ಉಂಟಾಗುತ್ತಿದೆ. ಹೆಣ್ಣು ಮಕ್ಕಳು ಹೊರೆ ಎಂದು ಭಾವಿಸದೇ, ಹೆಣ್ಣು ಮತ್ತು ಗಂಡು ಮಕ್ಕಳನ್ನು ಸಮಾನವಾಗಿ ಕಾಣಬೇಕು. ಇದರಿಂದ ಲಿಂಗಾನುಪಾತದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.

You cannot copy content from Baravanige News

Scroll to Top